ದಾವಣಗೆರೆ: ಬಿಜೆಪಿ ತಪ್ಪು ನಿರ್ಧಾರ, ಗುಜರಾತ್ ಮಾದರಿಯೇ ಸೋಲಿಗೆ ಕಾರಣ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಮಂಗಳವಾರ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೊಂದಿಗೆ ಮಾತನಾಡಿದ ಅವರು, “ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು” ಎಂದಿದ್ದಾರೆ.
“ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಮುದಾಯಕ್ಕೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ಇದ್ದಾರೆ. ಭಾರತೀಯ ಜನತಾ ಪಕ್ಷದಲ್ಲಿ ಇಂತಹ ಪ್ಲ್ಯಾನ್ ಮಾಡಲೇ ಇಲ್ಲ. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಹೇಳುತ್ತಿದ್ದಾರೆ. ಯಡಿಯೂರಪ್ಪರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು” ಎಂದು ತಿಳಿಸಿದ್ದಾರೆ.