ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ ಎಂಬ ಹೆಸರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದು, ಇಂದು ನಟ, ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ದೀಪ ಬೆಳಗಿಸಿ ಗಂಗಾರಾತಿ ಮಾಡಿ ಕಂಬಳ ಕೆರೆಗೆ ಅಧಿಕೃತ ಚಾಲನೆ ನೀಡಿದ್ದಾರೆ.
ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ, ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಹಾಜರಿದ್ದರು.
ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿದರು.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಯಾವುದೇ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ.
ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ. ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.
ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ಕುಮಾರ್ ಹೆಸರು ಇಡಲಾಗಿದೆ. ಕಂಬಳದ ಟ್ರಾಕ್ (ಕರೆ)ಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವ ಇರಲಿದೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಆಯೋಜಿಸಲಾಗಿದೆ.