ಹೊಸದಿಲ್ಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರನ್ನು ಏಕೈಕ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಇಂದೇ ಘೋಷಣೆಯಾಗಲಿದೆ.
ಹಿಮಾಚಲ ಪ್ರದೇಶದ ಶಿಮ್ಲಾಕ್ಕೆ ಹೋಗಿದ್ದ ಸೋನಿಯಾ ಗಾಂಧಿ ಅವರು ಬುಧವಾರ ದೆಹಲಿಗೆ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ದೂರವಾಣಿ ಮೂಲಕವೇ ಡಿಕೆಶಿ ಜೊತೆ ಮಾತುಕತೆ ನಡೆಸಿದ್ದರಿಂದ ಸೋನಿಯಾ ಅವರ ಮಾತಿಗೆ ಡಿಕೆಶಿ ಒಪ್ಪಿ ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ. ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಕೊನೆಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ಮುಖಂಡರು ಉಭಯ ನಾಯಕರನ್ನು ಮನವೊಲಿಸಲು ಯಶಸ್ವಿಯಾಗಿ ರಾಜಿ ಸಂಧಾನ ಸೂತ್ರಕ್ಕೆ ಒಪ್ಪಿಸಿದ್ದಾರೆ.
ಮಾಧ್ಯಮದ ಜೊತೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, “ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇಬೇಕಾಗಿದೆ. ಹೈಕಮಾಂಡ್ ಯಾವುದೇ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ಭರವಸೆ ಕೊಟ್ಟಿದೆ. ಅದನ್ನು ಈಡೇರಿಸಬೇಕಾದುದು ನಮ್ಮ ಆದ್ಯತೆಯಾಗಿದೆ” ಎಂದು ಹೇಳಿದ್ದಾರೆ.
ಇಂದು ಸಂಜೆ ಸಿಎಲ್ ಪಿ ಸಭೆ: ನೂತನ ಮುಖ್ಯಮಂತ್ರಿ ಆಯ್ಕೆಯಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿ.ಕೆ ಶಿವಕುಮಾರ್ ಆಹ್ವಾನಿಸಿದ್ದಾರೆ.
ಮೇ 20ರಂದೇ ಸಚಿವ ಸಂಪುಟ ರಚನೆ ಸಾಧ್ಯತೆ: ಇದ್ದು ಸಿಎಂ, ಡಿಸಿಎಂ ಜೊತೆ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಶನಿವಾರ ಮೊದಲ ಹಂತದ ಮಂತ್ರಿ ಮಂಡಲ ಅಸ್ತಿತ್ವ ಬರುವ ನಿರೀಕ್ಷೆ ಇದೆ. 10ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಲ್ಲಮೂಲಗಳು ತಿಳಿಸಿವೆ.