Friday, June 6, 2025

ಅರ್ಹ ಕುಟುಂಬಗಳ BPL ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ: ಪದ್ಮರಾಜ್

by eesamachara
0 comment

ಮಂಗಳೂರು: ಕೇಂದ್ರ ಸರಕಾರವು 5.80 ಕೋಟಿ ಇಂತಹ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಆದರೆ ಇದರ ಬಗ್ಗೆ ಚಕಾರವೆತ್ತದ ಬಿಜೆಪಿ ನಾಯಕರು ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.

ಶನಿವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಡಿತರ ಚೀಟಿಗಳ ಪರಿಷ್ಕರಣೆಯ ವೇಳೆ ಅಧಿಕಾರಿಗಳ ತಪ್ಪಿನಿಂದ ಸಮಸ್ಯೆ ಆಗಿದ್ದರೂ ಅದನ್ನು ಸರಕಾರ ಸರಿ ಮಾಡುವ ಕೆಲಸ ಮಾಡಲಿದೆ. ಇದರ ಬಗ್ಗೆ ಬಿಜೆಪಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದೆ. ಜಿಲ್ಲೆ, ರಾಜ್ಯಾದ್ಯಂತ ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

2019ರಲ್ಲಿ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ 226 ನೋಟೀಸು ನೀಡಿರುವುದನ್ನು ಮರೆತಿದೆ. ಈಗ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿಗರು ವಿನಾ ಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದ ಅವರು, ಸಿದ್ಧರಾಮಯ್ಯ ನೇತೃತ್ವದ ಸರಕಾರ ಯಾವುದೇ ಕಾರಣಕ್ಕೂ ಸಾಕ್ಷ ಇಲ್ಲದೆ ರೈತರು, ದೇವಸ್ಥಾನ ಜಾಗವನ್ನು ವಕ್ಫ್ ಗೆ ಹಸ್ತಾಂತರಿಸುವ ಕೆಲಸ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ತಿಳಿಸಿದರು.

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಎಲ್ಲಾ ಚುನಾವಣೋತ್ತರ ಫಲಿತಾಂಶಗಳನ್ನು ಮೀರಿ ಬಂದಿದೆ. ಈ ಮೂಲಕ ಜನತೆ ಸಿದ್ದರಾಮಯ್ಯ ನೇತೃತ್ವದ ಸರಕಾರದ ಅಭಿವೃದ್ಧಿ ಪೂರಕ ಕೆಲಸಕ್ಕೆ ಬೆಂಬಲ ನೀಡಿದಂತಾಗಿದೆ. ಜಾರ್ಖಂಡ್‌ನಲ್ಲಿಯೂ ಸಮೀಕ್ಷೆಯನ್ನು ಮೀರಿ ಕಾಂಗ್ರೆಸ್‌ಗೆ ಗೆಲುವು ದೊರಕಿದೆ. ಮಹಾರಾಷ್ಟ್ರದ ಕಾಂಗ್ರೆಸ್ ಸೋಲನ್ನು ನಾವು ಸ್ವೀಕರಿಸುತ್ತೇವೆ ಎಂದರು.

ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ, ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹೇಮಂತ್ ಗರೋಡಿ,  ಶಬ್ಬೀರ್ .ಎಸ್, ಹಬೀಬ್ ಕಣ್ಣೂರು, ಸಲೀಂ ಪಾಂಡೇಶ್ವರ, ದುರ್ಗಾ ಪ್ರಸಾದ್, ಇಮ್ರಾನ್ ಎ.ಆರ್ ಉಪಸ್ಥಿತರಿದ್ದರು.


You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios