Saturday, June 7, 2025

ಕೋವಿಡ್​ ಹಗರಣ ತನಿಖೆಗೆ SIT ರಚನೆ ಮಾಡಲು ಸಚಿವ ಸಂಪುಟ ಅಸ್ತು: ಯಡಿಯೂರಪ್ಪ, ಶ್ರೀರಾಮುಲು, ಡಾ.C.N.ಮಂಜುನಾಥ್ ಗೆ ಸಂಕಷ್ಟ?

by eesamachara
0 comment
covid

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ದಳ ರಚಿಸಲು ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ  ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೊವಿಡ್​ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ, “ಕೋವಿಡ್ ಅವಧಿಯಲ್ಲಿನ ಅಕ್ರಮಗಳ ಕುರಿತು ನ್ಯಾಯಮೂರ್ತಿ ಮೈಕಲ್ ಡಿಕುನ್ಹ ಆಯೋಗ ವಿಚಾರಣೆ ನಡೆಸುತ್ತಿದೆ. ಆಯೋಗವು ಮಧ್ಯಂತರ ವರದಿ ಸಲ್ಲಿಸಿದೆ. ಆಯೋಗದ ಶಿಫಾರಸಿನಂತೆ ಕೆಲವು ಪ್ರಕರಣಗಳ ತನಿಖೆಗೆ ಎಸ್‌ಐಟಿ ನೇಮಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.  ಪಿಪಿಇ ಕಿಟ್, ಔಷಧಿ, ಯಂತ್ರೋಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ, ಕೋವಿಡ್ ಸಾಂಕ್ರಾಮಿಕದಿಂದ ಸಂಭವಿಸಿದ ಸಾವುಗಳ ಮಾಹಿತಿ ಮುಚ್ಚಿಟ್ಟಿರುವುದು, ದಾಖಲೆಗಳ ನಾಶ ಸೇರಿದಂತೆ ಹಲವು ವಿಷಯಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸಲಿದೆ” ಎಂದು ಮಾಹಿತಿ ನೀಡಿದರು.

ಮೂವರಿಗೆ ಸಂಕಷ್ಟ: ಕೋವಿಡ್​ ಹಗರಣದ ತನಿಖೆಗೆ ಸರ್ಕಾರದಿಂದ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಅಂದಿನ ಸಿಎಂ ಆಗಿದ್ದ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಸೇರಿದಂತೆ ಇತರರಿಗೆ ಸಂಕಷ್ಟ ಎದುರಾಗಲಿದೆ. ಇನ್ನೂ ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದ ಸಂಸದ ಡಾ.ಸಿ.ಎನ್.ಮಂಜುನಾಥ್​ಗೆ ಈ ಹಗರಣ ಕಂಟಕ ತಂದಿಡಬಹುದು ಎನ್ನಲಾಗಿದೆ. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದರಿಂದ ಮಂಜುನಾಥ್ ಅವರ ಬುಡಕ್ಕೂ ಹಗರಣ ಬಂದರೂ ಅಚ್ಚರಿ ಪಡಬೇಕಿಲ್ಲ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios