ಮಂಗಳೂರು: ಬ್ಯಾಪ್ಟಿಸ್ಟ್ ಸ್ಪೋರ್ಟ್ಸ್ ಫೌಂಡೇಶನ್ (ರಿ.) ವತಿಯಿಂದ ದ.ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉರ್ವ ಸ್ಟೋರ್ ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ ಇದರ ಸಹಯೋಗದಲ್ಲಿ ಮಂಗಳೂರು ಸರಕಾರಿ ಅನುದಾನಿತ-ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ‘ರಾಜ್ಯೋತ್ಸವ ಕಪ್-2024’ ನಾಳೆ (ಅ.26) ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಪಂದ್ಯಾಟವನ್ನು ರಾಷ್ಟ್ರೀಯ ವಾಲಿಬಾಲ್ ಆಟಗಾರ ಸುನೀಲ್ ಬಾಳಿಗಾ ಅವರು ಉದ್ಘಾಟಿಸಲಿದ್ದು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ಪ್ರದೀಪ್ ಡಿಸೋಜಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ದ.ಕ.ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯ್ಸ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ವಾಲಿಬಾಲ್ ಆಟಗಾರ ಎವರೆಸ್ಟ್ ಪಾಯ್ಸ್ ಬಹುಮಾನ ವಿತರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.