Friday, June 6, 2025

ಬಿಜೆಪಿ ನಾಯಕರ ಸುಳ್ಳನ್ನು ಜನರು ನಂಬಿಲ್ಲ, ಚುನಾವಣಾ ಫಲಿತಾಂಶವೇ ಸಾಕ್ಷಿ: ಸಿದ್ದರಾಮಯ್ಯ

by eesamachara
0 comment

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದು, ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಪಚುನಾವಣೆಯ ಗೆಲುವಿನ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ಹೊಸ ಸ್ಪೂರ್ತಿ ತುಂಬಿದೆ ಎಂದರು.

ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತದ ಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಲ ಅನುಷ್ಠಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.

ಎರಡೂ ಪಕ್ಷಗಳು ಕೂಡಿಕೊಂಡು ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು. ರಾಜಕೀಯ ದ್ವೇಷಸಾಧನೆಗಾಗಿ ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದರು. ಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ ನನ್ನ ರಾಜಕಾರಣವನ್ನು  ಕಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ನುಡಿದರು.

ಬಿಜೆಪಿ ಮತ್ತು ಜೆಡಿಎಸ್  ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ, ಜಾತಿ-ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದೆ. ಕರ್ನಾಟಕದ ಜಾತ್ಯತೀತ ಮತ್ತು ಶಾಂತಿಪ್ರಿಯ ಸಮಾಜ ಇದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು 136 ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ ಚುನಾವಣಾ ಫಲಿತಾಂಶದ ಮರುದಿನದಿಂದಲೇ ಬಿಜೆಪಿ ಮತ್ತು ಜೆಡಿಎಸ್ ಕೂಡಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನ ಶುರು‌ಮಾಡಿದ್ದರು. ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನ‌ ಮಾಡಿದ್ದರು. ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ರಾಜ್ಯದ ಜನತೆ ಸಹಿಸಿಲ್ಲ ಎನ್ನುವುದನ್ನು ಕೂಡಾ ಈ ಫಲಿತಾಂಶ ಹೇಳಿದೆ ಎಂದರು.

ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿರುವುದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಂ ವ್ಯಕ್ತಿಗೆ ನಾವು ಟಿಕೆಟ್ ಕೊಟ್ಟೆವು. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವಾಗಿದೆ ಎಂದು ತಿಳಿಸಿದರು.

ಈ ಉಪಚುನಾವಣೆಯ ಸೋಲು ಬಿಜೆಪಿ ನಾಯಕರ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ. ಇನ್ನಾದರೂ ಅವರು ದ್ವೇಷದ ರಾಜಕಾರಣವನ್ನು ಕೈಬಿಟ್ಟು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡಲಿ. ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದರು. ಇಬ್ಬರೂ ಒಟ್ಟಾಗಿ ಪಾದಯಾತ್ರೆ ಮಾಡಿದ್ದೇನು, ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು ಅವಮಾನಿಸಿದ್ದೇನು, ಸರ್ಕಾರ ಬೀಳಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದೇನು, ಜೊತೆಜೊತೆಗೆ ಚುನಾವಣಾ ಪ್ರಚಾರ ಮಾಡಿದ್ದೇನು, ಇವೆಲ್ಲವನ್ನೂ ಜನತೆ ಬಹಳ ತಾಳ್ಮೆಯಿಂದ ನೋಡಿ, ಪ್ರಜ್ಞಾಪೂರ್ವಕವಾಗಿ ಯೋಚಿಸಿ ನಮಗೆ ಮತ ನೀಡಿದ್ದಾರೆ ಎಂದು ವಿಶ್ಲೇಷಿಸಿದರು.

ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಸರ್ಕಾರ ಕರ್ನಾಟಕದಲ್ಲಿ ಗ್ಯಾರಂಟಿಗಳೇ ಜಾರಿ ಆಗಿಲ್ಲ ಎಂದು ಸುಳ್ಳು ಜಾಹಿರಾತನ್ನೇ ನೀಡಿತ್ತು. ನಿರಂತರ ಸುಳ್ಳು, ಅಪಪ್ರಚಾರದಲ್ಲೇ ಈ ಉಪಚುನಾವಣೆ ನಡೆಸಿದ್ದರು. ಎಲ್ಲಾ ಸುಳ್ಳು, ಅಪಪ್ರಚಾರಗಳಿಗೂ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ.

ಪಕ್ಷದ ಅಧ್ಯಕ್ಷರು, ಮಂತ್ರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಎಲ್ಲರ ಶ್ರಮಕ್ಕೆ ಸಾರ್ಥಕತೆ ಸಿಕ್ಕಿದೆ. ವಯನಾಡ್ ನಲ್ಲಿ 4 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಪ್ರಿಯಾಂಕ ಗಾಂಧಿಯವರಿಗೆ ಮತ್ತು ಕೇರಳ ಜನತೆಗೆ ಅಭಿನಂದನೆಗಳು. ಜಾರ್ಖಂಡ್ ನಲ್ಲಿ ಮುಖ್ಯಮಂತ್ರಿ ಸುರೇನ್ ಅವರನ್ನು ಇ.ಡಿ ಯವರು ಜೈಲಿಗೆ ಕಳುಹಿಸಿದ್ದರು. ಬಿಜೆಪಿಯವರು ಸುಳ್ಳು ಕೇಸಲ್ಲಿ ಮುಖ್ಯಮಂತ್ರಿಯವರನ್ನು ಜೈಲಿಗೆ ಕಳುಹಿಸಿದರೂ ಜನತಾ ನ್ಯಾಯಾಲಯದಲ್ಲಿ ಜನ ಅವರ ಪರವಾಗಿ ತೀರ್ಪು ಕೊಟ್ಟಿದ್ದಾರೆ. ಜಾರ್ಖಂಡ್ ಜನರನ್ನು ಅಭಿನಂಧಿಸುತ್ತೇನೆ ಎಂದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios